ಗುರುವಾರ, ಫೆಬ್ರವರಿ 27, 2020

ದಾಸ್ಯ-ಸ್ವಾತಂತ್ರ್ಯ-ಸ್ವೇಚ್ಛೆ


ಮಳೆಯ ಪ್ರಮಾಣ ಹೆಚ್ಚು-ಕಡಿಮೆಯಾದರೆ ಅತಿವೃಷ್ಟಿ-ಅನಾವೃಷ್ಟಿಗಳು ಉಂಟಾಗುತ್ತವೆ. ಹಾಗೆಯೇ ಸ್ವತಂತ್ರ್ಯತೆಯ ಏರಿಳಿತವೂ ದಾಸ್ಯ ಮತ್ತು ಸ್ವೇಚ್ಛೆಯನ್ನು ಸೃಷ್ಟಿ ಮಾಡುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ನಿಜ, ಆದರೆ ದೇಶದ ಪ್ರತಿಯೊಬ್ಬ ನಾಗರೀಕನಿಗೂ ಸ್ವಾತಂತ್ರ್ಯ ಸಿಕ್ಕಿದೆಯೇ? ನಿಜವಾಗಿಯೂ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವತಂತ್ರನಾಗಿ ಬಾಳ್ವೆ ನಡೆಸುತ್ತಿದ್ದಾನೆ ಎಂದಾದಲ್ಲಿ ಜೀತ ಪದ್ಧತಿ, ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿರುವುದೇಕೆ?

ಮಹಾತ್ಮ ಗಾಂಧೀಜಿಯವರ ಹೇಳಿಕೆಯಂತೆ ನಡುರಾತ್ರಿ ಮಹಿಳೆಯೊಬ್ಬಳು ನಿರ್ಭೀತಿಯಿಂದ ನಡೆದಾಡುವಂತಾದರೆ ಅದೇ ಸ್ವಾತಂತ್ರ್ಯ. ಹಾಡುಹಗಲೇ ಪುಟ್ಟ ಬಾಲಕಿಯಿಂದ ಹಿಡಿದು ವೃದ್ಧೆಯವರೆಗೂ ಅತ್ಯಾಚಾರ ನಡೆಯುತ್ತಿರುವಾಗ ನಡುರಾತ್ರಿಯ ಮಾತೆಲ್ಲಿ? ಇದಕ್ಕೆ ಅಪವಾದ ಎಂಬಂತೆ ಸ್ವೇಚ್ಛೆಯಿಂದ ಬಾಳ್ವೆ ನಡೆಸುವವರೂ ಇದ್ದಾರೆ.

ತ್ಯಾಗ,ಶಾಂತಿ ಮತ್ತು ಸಮೃದ್ಧಿಯ ಕುರುಹಾಗಿ ಇರುವ ಕೇಸರಿ,ಬಿಳಿ,ಹಸಿರಿನ ಬಾವುಟ ಇಂದು ಹಿಂದು,ಕ್ರೈಸ್ತ ಮತ್ತು ಮುಸಲ್ಮಾನರ ಧರ್ಮಗಳ ಪ್ರತ್ಯೇಕ ಸಂಕೇತವೆಂಬಂತೆ ಆಯಾ ಧರ್ಮಗಳ ಮುಖಂಡರಿಂದ ಬಿಂಬಿತವಾಗುತ್ತಿದೆ.ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲೆ ಮೀರುತ್ತಿರುವಂತೆ ಭಾಸವಾಗುವುದಿಲ್ಲವೇ..?

ಸ್ವಾತಂತ್ರ್ಯ ಸಿಕ್ಕಿದೆ ಎಂಬುದಕ್ಕೆ ಆಡಂಭರದ ಅವಶ್ಯಕತೆ ಇಲ್ಲ. ಅದು ಸರಳವಾಗಿ, ಸಾಂಕೇತಿಕವಾಗಿ ದೇಶಭಕ್ತಿಯ ಪ್ರತೀಕವಾಗಿ ಬಿಂಬಿತವಾದರಷ್ಟೇ ಚೆನ್ನ. ಸ್ವಾತಂತ್ರ್ಯದ ಹಿಂದೆ ಹಲವಾರು ದೇಶಭಕ್ತರ ನೆತ್ತರ ತರ್ಪಣವಿದೆ. ಹೆಸರೇ ಹೇಳಲಿಚ್ಚಿಸದ ಅನಾಮಿಕ ಹೋರಾಟಗಾರರ ಮತ್ತು ಅವರ ಕುಟುಂಬದವರ ಅದ್ವಿತೀಯ ಛಲವಿದೆ, ಬಲವಿದೆ. ಶಾಂತಿ, ಅಹಿಂಸೆ, ಪ್ರತಿಭಟನೆ, ತ್ಯಾಗ, ಬಲಿದಾನ ಇವೆಲ್ಲದರ ಮಿಳಿತವಿದೆ. ಸ್ವಾತಂತ್ರ್ಯದ ಸದುಪಯೋಗಪಡಿಸಿಕೊಂಡು ಸ್ವತಂತ್ರವಾಗಿಯೇ ಬದುಕೋಣ. ದಾಸ್ಯದ ಸಂಕೋಲೆಯಲ್ಲಿ ಬಂಧಿಯಾಗಿಯೂ ಅಲ್ಲ, ಸ್ವೇಚ್ಛಾಚಾರಿಗಳಾಗಿಯೂ ಅಲ್ಲ.

~ವಿಭಾ ವಿಶ್ವನಾಥ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ